ಡಿವಿಜಿ ಸುದ್ದಿ, ದಾವಣಗೆರೆ: ಸಿಎಂ ರಾಜಕೀಯ ಕಾರ್ಯದರ್ಶಿ ಎಂ. ಪಿ. ರೇಣುಕಾಚಾರ್ಯ ಗುಂಪು ಕಟ್ಟಿಕೊಂಡು ನಗರದಲ್ಲಿ ಕೊರೊನಾ ವೈರಸ್ ಜಾಗೃತಿ ಮೂಡಿಸುತ್ತಿದ್ದಕ್ಕೆ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ತರಾಟೆ ತಗೆದುಕೊಂಡಿದ್ದಾರೆ.

ಇಡೀ ದೇಶವೇ ಲಾಕ್ ಡೌನ್ ಆಗಿದೆ. ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮನೆ ಬಿಟ್ಟು ಹೊರ ಬರಬೇಡಿ ಸಾರ್ವಜನಿಕರಲ್ಲಿ ಮನವಿ ಮಾಡಿಕೊಳ್ಳುತ್ತಿದ್ದಾರೆ. ಆದರೆ, ರೇಣುಕಾಚಾರ್ಯ ಅವರು ನಗರದಲ್ಲಿ ಇಂದು ಬೆಂಬಲಿಗರ ಗುಂಪು ಕಟ್ಟಿಕೊಂಡು ನಗರದಲ್ಲಿ ಕೊರೊನಾ ಬಗ್ಗೆ ಜಾಗೃತಿ ಮೂಡಿಸಲು ಮುಂದಾಗಿದ್ದರು. ಇದಕ್ಕೆ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅಸಮಾಧಾನ ಹೊರ ಹಾಕಿದರು.

ನಗರದ ದುರ್ಗಾಂಬಿಕಾ ದೇವಸ್ಥಾನದಲ್ಲಿ ನಡೆದ ಜಾಗೃತಿ ಜಾಥಾದಲ್ಲಿ ರೇಣುಕಾಚಾರ್ಯ ಅವರ ಜತೆ ಮೇಯರ್ ಬಿ.ಜೆ.ಅಜಯಕುಮಾರ್, ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಯಶವಂತರಾವ್ ಜಾಧವ್, ದೂಡಾ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್, ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷೆ ಉಮಾ ರಮೇಶ್ ಸೇರಿದಂತೆ ಅನೇಕ ಮುಖಂಡರು, ಕಾರ್ಯಕರ್ತರು ಜೊತೆಗಿದ್ದರು. ಈ ವೇಳೆ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರು ಹೀಗೆ ಗುಂಪು ಕಟ್ಟಿಕೊಂಡು ಜಾಗೃತಿ ಮೂಡಿದುವುದು ಸರಿಯಲ್ಲ. ಇದರಿಂದ ಸಾರ್ವಜನಿಕರಿಗೆ ಮತ್ತಷ್ಟು ತೊಂದರೆಯಾಗುತ್ತದೆ. ಇದು ಸಾಮಾಜಿಕ ಅಂತರ ಕಾಪಡುವ ಸಮಯ, ಪ್ರಚಾರದ ರೀತಿ ಗುಂಪು ಸೇರಿಸುವ ಸಮಯವಲ್ಲ ಎಂದು ಕ್ಲಾಸ್ ತಗೆದುಕೊಂಡರು.

ಕೊರೊನಾ ಬಗ್ಗೆ ಜಾಗೃತಿ ಮೂಡಿಸಲು ನಾಲ್ಕು ಜನರ ಜತೆ ಹೋಗಿದ್ದೆ. ಜಿಲ್ಲಾಧಿಕಾರಿ ಸೇರಿದಂತೆ ನಮ್ಮ ಮೇಲೆ ಹೆಚ್ಚಿನ ಜವಾಬ್ದಾರಿ ಇದೆ. ನಾನೇನು ಪ್ರಚಾರ ಮಾಡಿಲ್ಲ ಎಂದರು.



