ಡಿವಿಜಿ ಸುದ್ದಿ, ದಾವಣಗೆರೆ: ಈ ಬಾರಿಯ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಚುನಾವಣೆ ನೀತಿ ಸಂಹಿತೆ ಹಾಗೂ ಕೋವಿಡ್ ನಿಯಂತ್ರಣ ಕಾರಣಕ್ಕಾಗಿ ಅ. 31 ರಂದು ಸರಳವಾಗಿ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ ತಿಳಿಸಿದರು.
ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಕುರಿತು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಏರ್ಪಡಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಈ ಬಾರಿ ಕೋವಿಡ್ ರೋಗ ಹರಡುವ ಭೀತಿ ಇರುವುದರಿಂದ ಹಾಗೂ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ, ಆದಷ್ಟು ಗುಂಪುಗೂಡದೆ ಕೋವಿಡ್-19 ನಿಯಂತ್ರಣ ಮಾರ್ಗಸೂಚಿ ಹಾಗೂ ನೀತಿ ಸಂಹಿತೆಯನ್ನು ಪಾಲಿಸಿ ಅ.31 ರಂದು ತುಂಗಭದ್ರಾ ಸಭಾಂಗಣದಲ್ಲಿ ಸರಳವಾಗಿ ಆಚರಿಸಲಾಗುವುದು ಎಂದರು.
ಜಿ.ಪಂ ಸದಸ್ಯ ಕೆ.ಹೆಚ್. ಓಬಳಪ್ಪ ಮಾತನಾಡಿ ಕಳೆದ ಬಾರಿ ವಾಲ್ಮೀಕಿ ಜಯಂತಿಯನ್ನು ಪಾದಯಾತ್ರೆ ಕೈಗೊಂಡು ಅದ್ದೂರಿಯಾಗಿ ಆಚರಿಸಲಾಗಿತ್ತು. ಆದರೆ ಈ ಬಾರಿ ಪರಿಸ್ಥಿತಿಯನ್ನು ಅವಲೋಕಿಸಿಕೊಂಡು, ಕೋವಿಡ್ ವೈರಸ್ ಹರಡುವುದನ್ನು ತಪ್ಪಿಸುವ ಸಲುವಾಗಿ ಸರಳವಾಗಿ ಆಚರಿಸುವುದು ಸೂಕ್ತ ಎಂದು ಸಲಹೆ ನೀಡಿದರು.
ಸಭೆಯಲ್ಲಿ ಉಪವಿಭಾಗಾಧಿಕಾರಿ ಮಮತ ಹೊಸಗೌಡರ್, ಡಿವೈಎಸ್ಪಿ ನಾಗೇಶ್ ಐತಾಳ್, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಸುರೇಶ್ ರೆಡ್ಡಿ, ನಾಯಕ ಸಮಾಜದ ಮುಖಂಡರುಗಳಾದ ಜಿ.ಪಂ. ಸದಸ್ಯ ಓಬಳಪ್ಪ, ವಕೀಲರಾದ ಆಂಜನೇಯ ಗುರೂಜಿ, ಬಿ.ವೀರಣ್ಣ, ಹದಡಿ ಹಾಲಪ್ಪ, ಗುಮ್ಮನೂರು ಮಲ್ಲಿಕಾರ್ಜುನ್, ಶ್ರೀನಿವಾಸ್ ದಾಸಕರಿಯಪ್ಪ, ಮಂಜುನಾಥ್, ಅಣಜಿ ಆಂಜಿನಪ್ಪ ಇತರರಿದ್ದರು.



