ಡಿವಿಜಿ ಸುದ್ದಿ, ಬಳ್ಳಾರಿ: ಪ್ರತಿಯೊಬ್ಬರಿಗೂ ಅಧಿಕಾರದ ಆಸೆ ಇರುವುದು ಸಹಜ. ರಾಜಕೀಯ ಬದಲಾವಣೆ ಬಗ್ಗೆ ಕೆಲವು ಶಾಸಕರು ಚರ್ಚೆ ಮಾಡಿರಬಹುದು. ಹೀಗೆ ಚರ್ಚೆ ಮಾಡಿದ ಮಾತ್ರಕ್ಕೆ ಅದು ಭಿನ್ನಮತವಲ್ಲ ಎಂದು ಡಿಸಿಎಂ ಸಾರಿಗೆ ಸಚಿವ ಲಕ್ಮಣ್ ಸವದಿ ಹೇಳಿದರು.
ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಮುರುಗೇಶ್ ನಿರಾಣಿ ಅವರ ಮನೆಯಲ್ಲಿ ಎಲ್ಲರು ಸೇರಿ ಊಟ ಮಾಡಿದ್ದು ನಿಜ. ಲಾಕ್ಡೌನ್ ಹಿನ್ನೆಲೆ ಬೆಂಗಳೂರಿನಲ್ಲಿ ಎಲ್ಲಾ ಹೋಟೆಲ್ಗಳು ಬಂದ್ ಆಗಿದ್ದವು. ಎಲ್ಲಿಯೂ ಊಟ ಸಿಗುತ್ತಿರಲಿಲ್ಲ. ನಮ್ಮೂರಿಗೆ ಬಂದಾಗ ಶಾಸಕರಿಗೆ ನಾನೂ ಕೂಡ ಊಟ ಏರ್ಪಡಿಸಿದ್ದೆ. ಅದು ಭಿನ್ನಮತವಲ್ಲ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ನಮ್ಮ ನಾಯಕರು ಎಂದು ತಿಳಿಸಿದರು.
ಬಸನಗೌಡ ಪಾಟೀಲ್ ಯತ್ನಾಳ್, ಉಮೇಶ್ ಕತ್ತಿ ಅವರು ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ತಮ್ಮ ಸಹೋದರ ರಮೇಶ್ ಕತ್ತಿಗೆ ರಾಜ್ಯಸಭೆಗೆ ಕಳುಹಿಸಬೇಕೆಂದು ಬೇಡಿಕೆ ಇಟ್ಟಿದ್ದಾರೆ. ಅದರಲ್ಲಿ ತಪ್ಪಿಲ್ಲ. ಬೆಳಗಾವಿಯಿಂದ ಸರ್ಕಾರಕ್ಕೆ ಯಾವುದೇ ತೊಂದರೆ ಇಲ್ಲ. ಪಕ್ಷ ತೆಗೆದುಕೊಂಡ ನಿರ್ಧಾರಕ್ಕೆ ಎಲ್ಲರೂ ಬದ್ಧರಾಗಿರಬೇಕು. ವರಿಷ್ಠರು ಎಲ್ಲವನ್ನೂ ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ ಎಂದರು.



