ಡಿವಿಜಿ ಸುದ್ದಿ, ಬೆಂಗಳೂರು: ಕಾಂಗ್ರೆಸ್ ನಾಯಕರು ಇನ್ನಾದರೂ ಮತ ಬ್ಯಾಂಕ್ ರಾಜಕೀಯ ಬಿಡಲಿ. ಯಾವುದೇ ಸಂಘಟನೆ ತಪ್ಪು ಮಾಡಿದರೂ ನಾವು ಅವರನ್ನು ಬಿಡುವುದಿಲ್ಲ. ನಮ್ಮದೇನಿದ್ದರೂ ಏಕ್ ಮಾರ್ ದೋ ತುಕ್ಡಾ ಕ್ರಮ. ಬೆಂಗಳೂರು ಗಲಭೆಯಲ್ಲಿ ಉಂಟಾಗಿರುವ ಆಸ್ತಿ ನಷ್ಟವನ್ನು ಅವರಿಂದಲೇ ತುಂಬಿಸುತ್ತೇವೆ ಎಂದು ಪ್ರವಾಸೋದ್ಯಮ ಸಚಿವ ಸಿ.ಟಿ. ರವಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್ಡಿಪಿಐ ನಿಷೇಧ ವಿಚಾರ ಇಂದಿನ ಕ್ಯಾಬಿನೆಟ್ ಸಭೆಯಲ್ಲಿ ಚರ್ಚೆ ನಡೆಯಲಿದೆ. ಯಾವುದೇ ಒಂದು ಘಟನೆ ಮೇಲೆ ನಿಷೇಧದಂತಹ ನಿರ್ಧಾರ ಮಾಡಲು ಸಾಧ್ಯವಿಲ್ಲ. ಆದರೆ ಈ ಹಿಂದೆ ನಡೆದಿರುವ ಹಲವಾರು ಸಮಾಜ ಘಾತುಕ ಘಟನೆಗಳ ಬಗ್ಗೆ ಕೂಡ ಸಾಕ್ಷಾಧಾರ ಕಲೆ ಹಾಕುವ ಕೆಲಸ ಆಗುತ್ತಿದೆ.
ಯಾವುದೇ ಸಮಾಜ ಘಾತುಕ ಶಕ್ತಿಗಳನ್ನು ಸಹಿಸಿಕೊಳ್ಳುವ ಪ್ರಶ್ನೆ ಇಲ್ಲ. ನಾಳೆ ದಿನ ಕೋರ್ಟಿನಲ್ಲೂ ಈ ಕುರಿತಂತೆ ಉತ್ತರ ನೀಡಬೇಕಾದ ಸಂದರ್ಭ ಎದುರಾಗುತ್ತದೆ. ಆದ್ದರಿಂದ ಅದಕ್ಕೆ ಬೇಕಾದ ಸೂಕ್ತ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದೇವೆ ಎಂದರು.
ಕೆಲವರು ರಾಜಕೀಯ ಕಾರಣಗಳಿಗಾಗಿ ನೀಡುತ್ತಿರುವ ಹೇಳಿಕೆಗಳನ್ನು ಗಮನಿಸುತ್ತಿದ್ದೇನೆ. ಅವರಿಗೆ ಅಕ್ಕಿ ಮೇಲೆ ಆಸೆ, ಅಕ್ಕನ ಮಕ್ಕಳ ಮೇಲೂ ಪ್ರೀತಿ ಅನ್ನೋ ರೀತಿ ಮಾಡುತ್ತಿದ್ದಾರೆ ಎಂದರು.



