ಡಿವಿಜಿ ಸುದ್ದಿ, ಬೆಂಗಳೂರು: ಖಾಸಗಿ ಶಾಲೆಗಳಲ್ಲಿ ಈಗಾಗಲೇ ದಾಖಲಾತಿಗೆ ಅವಕಾಶ ನೀಡಲಾಗಿದೆ. ವಿದ್ಯಾರ್ಥಿಗಳು, ಪೋಷಕರು, ಶಿಕ್ಷಕರು ಸೇರಿದಂತೆ ಎಲ್ಲರೂ ಶಾಲೆಗಳ ಆರಂಭಕ್ಕೆ ಉತ್ಸುಕರಾಗಿದ್ದು, ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ ಕೊಟ್ಟ ಬಳಿಕ ಶಾಲೆಗಳನ್ನು ಆರಂಭಿಸಲಾಗುವುದು ಶಿಕ್ಷಣ ಸಚಿವ ಎಸ್ .ಸುರೇಶ್ ಕುಮಾರ್ ಹೇಳಿದರು.
ವಿಧಾನಸೌಧದಲ್ಲಿ ರಾಜ್ಯ ಮಟ್ಟದ ಶಿಕ್ಷಕರ ದಿನಾಚರಣೆ ಮತ್ತು ಶಿಕ್ಷಕರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು.ಕೊರೊನಾದಿಂದ ತೀವ್ರ ಸಂಕಷ್ಟದಲ್ಲಿರುವ ಖಾಸಗಿ ಶಾಲೆಯ 3.5 ಲಕ್ಷ ಶಿಕ್ಷಕರಿಗೆ ನೆರವು ನೀಡಲು ಸರ್ಕಾರ ಬದ್ಧವಾಗಿದೆ. ಈ ಶಿಕ್ಷಕರಿಗೆ ಯಾವುದಾದರೂ ರೂಪದಲ್ಲಿ ನೆರವು ನೀಡಲಾಗುವುದು ಎಂದು ತಿಳಿಸಿದರು.
34 ವರ್ಷಗಳ ಬಳಿಕ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ರೂಪಿಸಲಾಗಿದೆ. ಎಲ್ಲರನ್ನೂ ಒಳಗೊಂಡು ಈ ನೀತಿಯನ್ನು ಅನುಷ್ಠಾನಕ್ಕೆ ತರಲಾಗುತ್ತಿದೆ. ಒಳ್ಳೆಯ ಶಿಕ್ಷಣ ನೀಡುವ ಜವಾಬ್ದಾರಿ ಸರ್ಕಾರದ ಮೇಲಿದೆ. ಅದಕ್ಕೆ ಪೂರಕವಾಗಿ ಕೆಲಸ ಮಾಡಲಾಗುತ್ತಿದೆ ಎಂದು ಸಚಿವರು ಹೇಳಿದರು.
ಕಳೆದ ವರ್ಷ ನೀಡಿದ್ದ ಭರವಸೆಯಂತೆ ಶಿಕ್ಷಕ ಸ್ನೇಹಿ ವರ್ಗಾವಣೆ ನೀತಿ ಜಾರಿಗೆ ತರಲಾಗಿದೆ. ರಾಜ್ಯದ ಯಾವ ಮಗುವೂ ಶಿಕ್ಷಣದಿಂದ ವಂಚಿತರಾಗಬಾರದು ಎಂದರು.
ಪ್ರಶಸ್ತಿ ಪ್ರದಾನ ಮಾಡಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಾತನಾಡಿ, ಕೊರೊನಾ ಸಂಕಷ್ಟದ ನಡುವೆಯೂ ಶಿಕ್ಷಕರು ಮಕ್ಕಳನ್ನು ಕಲಿಕೆಯಲ್ಲಿ ತೊಡಗಿಸಬೇಕಿದೆ. ರಾಜ್ಯದಲ್ಲಿ ಯಶಸ್ವಿಯಾಗಿ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಗಳನ್ನು ನಡೆಸಿರುವುದು ಇಡೀ ದೇಶಕ್ಕೆ ಮಾದರಿ ಎಂದರು.



