ಡಿವಿಜಿ ಸುದ್ದಿ,ಹರಿಹರ: ವಾಲ್ಮೀಕಿ ಸಮುದಾಯಕ್ಕೆ ಸಂವಿಧಾನಿಕವಾಗಿ ಸಲ್ಲಬೇಕಾದ ಮೀಸಲಾತಿ ಕಲ್ಪಿಸದಿದ್ದರೆ, ಮುಂದಿನ ದಿನಗಳಲ್ಲಿ ತಕ್ಕ ಪಾಠ ಕಲಿಸುತ್ತೇವೆ ಎಂದು ಮಹಾರ್ಷಿ ವಾಲ್ಮೀಕಿ ಪೀಠದ ಪ್ರಸನ್ನಾನಂದ ಸ್ವಾಮೀಜಿ ಹೇಳಿದರು.
ತಾಲ್ಲೂಕಿನ ರಾಜನಹಳ್ಳಿಯ ವಾಲ್ಮೀಕಿ ಗುರುಪೀಠದಲ್ಲಿ ಭಾನುವಾರ ನಡೆದ ಮೀಸಲಾತಿ ಹೆಚ್ಚಳ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು,ಶಿಕ್ಷಣ ಹಾಗೂ ಉದ್ಯೋಗ ಕ್ಷೇತ್ರದಲ್ಲಿ ಶೇ 7.5 ಮೀಸಲಾತಿ ಪಡೆಯುವುದು ವಾಲ್ಮೀಕಿ ಸಮಾಜದ ಸಾಂವಿಧಾನಿಕ ಹಕ್ಕು. ಸರ್ಕಾರ ಮೀಸಲಾತಿ ಹೆಚ್ಚಳ ಮಾಡಿದರೆ ಅಭಿನಂದನೆ ಸಲ್ಲಿಸುತ್ತೇವೆ. ಇಲ್ಲವಾದಲ್ಲಿ ತಕ್ಕ ಪಾಠ ಕಲಿಸುತ್ತೇವೆ ಎಂದು ಎಚ್ಚರಿಸಿದರು.
ನಮ್ಮ ಸಮಾಜದ ಶಾಸಕರು, ಸಂಸದರನ್ನು ಒಳಗೊಂಡ ನಿಯೋಗದೊಂದಿಗೆ ಸೆ. 21ರಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮೀಸಲಾತಿ ಬಗ್ಗೆ ಮನವಿ ಸಲ್ಲಿಸಲಾಗುವುದು. ಈ ಬಾರಿಯ ಅಧಿವೇಶನದಲ್ಲಿ ಒಂದು ನಿರ್ಧಾರ ಕೈಗೊಳ್ಳಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ನಡೆಸುತ್ತೇವೆ ಎಂದರು.
ಶ್ರೀಗಳು ರಾಜೀನಾಮೆಗೆ ಸೂಚನೆ ನೀಡಿದರೆ, ಮೀಸಲು ಕ್ಷೇತ್ರದಿಂದ ಗೆದ್ದಿರುವ ನಾವು ರಾಜೀನಾಮೆ ನೀಡಲು ಸಿದ್ಧ ಎಂದು ಶಾಸಕರು ತಿಳಿಸಿದರು.ಮಾಜಿ ಸಚಿವ ಸತೀಶ್ ಜಾರಕಿಹೊಳಿ ಮಾತನಾಡಿ, ರಾಜೀನಾಮೆ ನೀಡುವುದು ಪರಿಹಾರವಲ್ಲ. ಅಧಿಕಾರದಲ್ಲಿದ್ದುಕೊಂಡೇ ಹೋರಾಟ ಮಾಡಬೇಕು ಎಂದರು.



