ಡಿವಿಜಿ ಸುದ್ದಿ, ಬೆಂಗಳೂರು: ವಲಸೆ ಕಾರ್ಮಿಕರಿಗೆ ಉಚಿತ ಬಸ್ ಪ್ರಯಾಣ ಸೇವೆಯನ್ನು ರಾಜ್ಯ ಸರ್ಕಾರ ಗುರುವಾರದ ವರೆಗೂ ವಿಸ್ತರಣೆ ಮಾಡಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತಿಳಿಸಿದ್ದಾರೆ.
ಮಂಗಳವಾರ ಈ ಸೌಲಭ್ಯ ಕೊನೆಗೊಳ್ಳುತ್ತಿತ್ತು. ಆದರೆ, ಕಾರ್ಮಿಕರ ಮತ್ತು ಜನರ ಅನುಕೂಲಕ್ಕಾಗಿ ಉಚಿತ ಸೌಲಭ್ಯವನ್ನು ಗುರುವಾರದವರೆಗೆ ವಿಸ್ತರಿಸಲಾಗಿದೆ. ಕಾರ್ಮಿಕರು ಮತ್ತು ಇತರೆ ಜನರು ಬಸ್ ನಿಲ್ದಾಣಗಳಲ್ಲಿ ಜಮಾವಣೆಯಾಗದೆ ನೆಮ್ಮದಿಯಿಂದ ತಮ್ಮ ಊರುಗಳಿಗೆ ತೆರಳಬೇಕೆಂದು ಮುಖ್ಯಮಂತ್ರಿಗಳು ಮನವಿ ಮಾಡಿದ್ದಾರೆ.
ಭಾನುವಾರ 951 ಕೆ.ಎಸ್.ಆರ್.ಟಿ.ಸಿ. ಬಸ್ಸುಗಳನ್ನು ಒದಗಿಸಲಾಗಿದ್ದು ಅಂದಾಜು 30 ಸಾವಿರ ಜನರು ತಮ್ಮ ಊರುಗಳಿಗೆ ಪ್ರಯಾಣ ಮಾಡಿರುತ್ತಾರೆ. ಇಂದು ಈಗಾಗಲೇ 50 ಬಸ್ಸುಗಳಲ್ಲಿ ಸುಮಾರು 1,500 ಪ್ರಯಾಣಿಕರು ತಮ್ಮ ಊರಿಗೆ ತೆರಳಿದ್ದಾರೆ. ಬೆಂಗಳೂರಿನಲ್ಲಿ 550 ಬಸ್ಸುಗಳು ಮತ್ತು ರಾಜ್ಯದ ವಿವಿಧ ನಗರಗಳಲ್ಲಿ 400 ಬಸ್ಸುಗಳನ್ನು ಈ ಸೌಲಭ್ಯಕ್ಕೋಸ್ಕರ ಕಾಯ್ದಿರಿಸಲಾಗಿದೆ. ಶನಿವಾರದಂದು ಕೂಡ 550 ಬಸ್ಗಳಲ್ಲಿ ಅಂದಾಜು 16,500 ಪ್ರಯಾಣಿಕರು ತಮ್ಮ ಊರುಗಳಿಗೆ ತೆರಳಿದ್ದಾರೆ.
ಪ್ರಯಾಣಕ್ಕಿಂತ ಮೊದಲು ಎಲ್ಲಾ ಜನರಿಗೂ ಉಚಿತ ಊಟ ಮತ್ತು ನೀರಿನ ವ್ಯವಸ್ಥೆ ಮಾಡಲಾಗಿರುತ್ತದೆ ಎಂದು ಮುಖ್ಯಮಂತ್ರಿಗಳು ಪ್ರಕಟಣೆಯಲ್ ತಿಳಿಸಿದ್ದಾರೆ.



