ಡಿವಿಜಿ ಸುದ್ದಿ, ಬೆಂಗಳೂರು:ಲಾಕ್ಡೌನ್ ಮುಂದುವರೆಸುವ ಯೋಚನೆ ಸರ್ಕಾರದ ಮುಂದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರಿನ ಎಂಟು ವಲಯಗಳ ಉಸ್ತುವಾರಿ ಸಚಿವರ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ಕೊರೊನಾ ವೈರಸ್ ನಿಯಂತ್ರಣಕ್ಕೆ ಲಾಕ್ಡೌನ್ ಸೂಕ್ತ ಪರಿಹಾರವಲ್ಲ. ಕೊರೊನಾ ಸೋಂಕಿತರು ಆಸ್ಪತ್ರೆಗೆ ದಾಖಲಾಗಲು ಆಗುತ್ತಿರುವ ಸಮಸ್ಯೆಗಳ ಬಗ್ಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.
ರೋಗಲಕ್ಷಣ ಇಲ್ಲದವರನ್ನು ಕೋವಿಡ್ ಕೇರ್ ಸೆಂಟರ್, ಇಲ್ಲವೇ ಹೋಂ ಕ್ವಾರಂಟೈನ್ಗೆ ಒಳಪಡಿಸಬೇಕು. ರೋಗಲಕ್ಷಣ ಬಳಲುತ್ತಿರುವ ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ಒದಗಿಸುವಂತೆ ಸೂಚಿಸಿದರು. ಕೂಡಲೇ ಖಾಸಗಿ ಆಸ್ಪತ್ರೆಗಳಿಂದಿಗೆ ಸಭೆ ನಡೆಸಿ, ಕೊರೊನಾ ಹಾಗೂ ಕೊರನೇತರ ರೋಗಿಗಳಿಗೆ ಚಿಕಿತ್ಸಾ ಸೌಲಭ್ಯ ನೀಡುವಂತೆ ತಿಳಿಸಿದರು.
ಆಸ್ಪತ್ರೆಗಳಲ್ಲಿ ಮೃತರಾದವರಿಗೆ ಪರೀಕ್ಷೆ ನಡೆಸಿ ಶವವನ್ನು ಕೂಡಲೇ ಹಸ್ತಾಂತರಿಸಬೇಕು. ಕೂಡಲೇ ಅಂತ್ಯಕ್ರಿಯೆ ನಡೆಸಬೇಕು. ಮನೆಗಳಲ್ಲಿ ಮೃತರಾದವರಿಗೂ ರ್ಯಾಪಿಡ್ ಆಂಟಿಜನ್ ಟೆಸ್ಟ್ ನಡೆಸಸಬೇಕು. ವೈದ್ಯರ ಕೊರತೆ ನಿವಾರಿಸಲು ಹುದ್ದೆಗಳ ಭರ್ತಿ ಪ್ರಕ್ರಿಯೆ ನಡೆಯುತ್ತಿದೆ. ಪ್ರತಿ ವಾರ್ಡಿನಲ್ಲಿಯೂ ಸ್ವಯಂ ಸೇವಕರನ್ನು ಗುರುತಿಸಲಾಗಿದೆ. ಖಾಸಗಿ ಆಸ್ಪತ್ರೆಗಳು ಬೆಡ್ ನೀಡದೇ ಇದ್ದರೆ ಕಠಿಣ ಕ್ರಮಕೈಗೊಳ್ಳಬೇಕು ಎಂದರು.
ಪ್ರತಿ ವಾರ್ಡುಗಳಲ್ಲಿ ಕಲ್ಯಾಣ ಮಂಟಪಗಳು ಹಾಗು ವಸತಿ ಗೃಹಗಳನ್ನು ಗುರುತಿಸಲಾಗಿದ್ದು,ಕ್ವಾರಂಟೈನ್ ಮಾಡಲು ಈ ಕಲ್ಯಾಣ ಮಂಟಪಗಳನ್ನು ಬಳಸುವಂತೆಯೂ ಸೂಚಿಸಿದರು.
ರಾಜ್ಯದಲ್ಲಿ ಪರೀಕ್ಷೆಗಳ ಸಂಖ್ಯೆ ಹೆಚ್ಚಿಸಲು ನಿರ್ದೇಶನ ನೀಡಲಾಗಿದೆ. ಜನರು ಹೆಚ್ಚಿನ ಸಂಖ್ಯೆಯಲ್ಲಿ ಗುಂಪು ಸೇರುವ ಪ್ರದೇಶದಲ್ಲಿ ಹೆಚ್ಚಿನ ಪೊಲೀಸ್ ಸಿಬ್ಬಂದಿ ನಿಯೋಜಿಸಬೇಕು. ಪರೀಕ್ಷೆಯ ಫಲಿತಾಂಶ ದೊರೆತ ಎರಡು ಗಂಟೆಗಳೊಳಗೆ ಹಾಸಿಗೆ ಹಂಚಿಕೆ ಮಾಡಿ, ಅಂಬ್ಯುಲೆನ್ಸ್ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲು ಕ್ರಮ ವಹಿಸಬೇಕು. ರೋಗ ಲಕ್ಷಣ ಇರುವ 65 ವರ್ಷ ಮೇಲ್ಪಟ್ಟ ವ್ಯಕ್ತಿಗಳಿಗೆ ಮೊದಲ ಆದ್ಯತೆಯ ನೀಡಬೇಕು ಎಂದು ಸೂಚನೆ ನೀಡಿದ್ದಾರೆ.



