ನವದೆಹಲಿ: ಇಡೀ ದೇಶದಲ್ಲಿಯೇ ಭಾರೀ ಸುದ್ದಿ ಮಾಡಿದ್ದ ನಿರ್ಭಯಾ ಅತ್ಯಾಚಾರ, ಹತ್ಯೆ ಪ್ರಕರಣದ 4 ಅಪರಾಧಿಗಳಿಗೆ ಜ. 22ರಂದು ಬೆಳಿಗ್ಗೆ 7 ಗಂಟೆಗೆ ಗಲ್ಲಿಗೇರಿಸುವಂತೆ ಪಟಿಯಾಲಾ ಹೌಸ್ ನ್ಯಾಯಾಲಯ ಆದೇಶಿಸಿದೆ.
ನಿರ್ಭಯಾ ಪ್ರಕರಣದಲ್ಲಿ ಒಟ್ಟು ಆರು ಜನರನ್ನು ಅಪರಾಧಿಗಳನ್ನಾಗಿ ತೀರ್ಪು ನೀಡಲಾಗಿತ್ತು. ಇವರಲ್ಲೊಬ್ಬ ಅಪ್ರಾಪ್ತ ಜೈಲು ಶಿಕ್ಷೆಯನ್ನು ಅನುಭವಿಸಿ ಬಿಡುಗಡೆಯಾಗಿದ್ದ, ಮತ್ತೊಬ್ಬ ರಾಮ್ ಸಿಂಗ್ ಎಂಬಾತ ತಿಹಾರ್ ಜೈಲಿನಲ್ಲೇ ಆತ್ಮಹತ್ಯೆಗೆ ಶರಣಾಗಿದ್ದನು.
ಉಳಿದ ಅಪರಾಧಿಗಳಿಗೆ ಮರಣದಂಡನೆಯನ್ನು ವಿಧಿಸಲಾಗಿತ್ತು. ಈ ಪೈಕಿ ಅಪರಾಧಿ ಅಕ್ಷಯ್ ಸಿಂಗ್ ಹೊರತುಪಡಿಸಿ ಇತರ ಅಪರಾಧಿಗಳಾದ ಮುಕೇಶ್ ಸಿಂಗ್, ಪವನ್ ಗುಪ್ತಾ ಮತ್ತು ವಿನಯ್ ಶರ್ಮಾರ ಮರುಪರಿಶೀಲನಾ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಹಿಂದೆಯೇ ತಿರಸ್ಕರಿಸಿತ್ತು. ಅಕ್ಷಯ್ ಸಿಂಗ್ ಮರುಪರಿಶೀಲನಾ ಅರ್ಜಿಯನ್ನು 2019ರ ಡಿಸೆಂಬರ್ 18ರಂದು ತಿರಸ್ಕರಿಸಿತ್ತು.
ಅಪರಾಧಿಗಳಿಗೆ 14 ದಿನಗಳಲ್ಲಿ ಕಾನೂನು ಪರಿಹಾರ ಕಂಡುಕೊಳ್ಳಲು ನ್ಯಾಯಾಲಯ ಅವಕಾಶ ಕಲ್ಪಿಸಲಾಗಿದೆ. ಆದೇಶದ ಬೆನ್ನಲ್ಲೇ, ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಲಾಗುವುದು ಎಂದು ಅಪರಾಧಿಗಳ ಪರ ವಕೀಲ ಎ.ಪಿ.ಸಿಂಗ್ ತಿಳಿಸಿದ್ದಾರೆ. ಇನ್ನೊಂದೆಡೆ ತಿಹಾರ್ ಜೈಲಿನಲ್ಲಿಗಲ್ಲಿಗೇರಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.



