ಡಿವಿಜಿ ಸುದ್ದಿ, ಬೆಂಗಳೂರು ಶಸ್ತ್ರಚಿಕಿತ್ಸೆ ಘಟಕ, ಆರೋಗ್ಯ ಸೇವೆ ಹೊಂದಿರುವ 2 ಕೋಟಿ ಅನುದಾನದ ಪಶು ಸಂಜೀವಿನಿ ವಾಹನ, 15 ಜಿಲ್ಲೆಗಳಲ್ಲಿ ಕಾರ್ಯ ನಿವರ್ಹಿಸಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.
ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಒಟ್ಟು 15 ಪಶು ಸಂಜೀವಿನಿ ವಾಹನಗಳಿಗೆ ವಿಧಾನಸೌಧದ ಆವರಣದಲ್ಲಿ ಇಂದು ಚಾಲನೆ ನೀಡಿ ಮಾತನಾಡಿದರು.
ಈ ವಾಹನದಲ್ಲಿ ಶಸ್ತ್ರಚಿಕಿತ್ಸೆ ಘಟಕ ಸೇರಿದಂತೆ ವಿವಿಧ ಆರೋಗ್ಯ ಸೇವೆ ಲಭ್ಯವಿರುತ್ತವೆ. ಮುಂದಿನ ದಿನಗಳಲ್ಲಿ ಈ ಯೋಜನೆಯನ್ನು ಮತ್ತಷ್ಟು ಜಿಲ್ಲೆಗಳಿಗೆ ವಿಸ್ತರಿಸಲಾಗುವುದು ಎಂದು ತಿಳಿಸಿದರು.
ಪಶು ಸಂಗೋಪನೆ ಸಚಿವ ಪ್ರಭು ಚೌಹಾಣ್ ಮಾತನಾಡಿ, ಮುಂದಿನ ದಿನಗಳಲ್ಲಿ ಮತ್ತಷ್ಟು ಜಿಲ್ಲೆಗಳಿಗೆ ಈ ವಾಹನ ಸೌಲಭ್ಯ ವಿಸ್ತರಿಸಲು ಉದ್ದೇಶಿಸಲಾಗಿದೆ. ರಾಜ್ಯದಲ್ಲಿ ಗೋ ರಕ್ಷಣೆಗೆ ಸರ್ಕಾರ ಬದ್ಧವಾಗಿದೆ. ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ಸರ್ಕಾರ ಚಿಂತನೆ ನಡೆಸುತ್ತಿದೆ. ಮುಂಗಾರು ಅಧಿವೇಶನದಲ್ಲಿ ಕಾಯ್ದೆ ಜಾರಿಗೆ ತರುವ ಯೋಚನೆ ಇದೆ ಎಂದರು.



