ಡಿವಿಜಿ ಸುದ್ದಿ, ಬೆಂಗಳೂರು: ಸೋಮವಾರ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಅಧಿಕೃತವಾಗಿ ಘೋಷಿಸಿದರು.
ಸಂಪುಟ ವಿಸ್ತರಣೆ ಕುರಿತು ಹೈಕಮಾಂಡ್ ಜೊತೆ ಚರ್ಚಿಸಲು ದೆಹಲಿಗೆ ತೆರಳಿದ್ದ ಸಿಎಂ, ಶುಕ್ರವಾರ ದೆಹಲಿಯಲ್ಲಿ ಎರಡ್ಮೂರು ದಿನಗಳಲ್ಲಿ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸಂಪುಟ ವಿಸ್ತರಣೆ ಮಾಡಲಾಗುವುದು ಎಂದು ಹೇಳಿದ್ದರು. ಆದರೆ ಇವತ್ತು ಅಧಿಕೃತವಾಗಿ ಸೋಮವಾರವೇ ಸಂಪುಟ ವಿಸ್ತರಣೆ ಮಾಡುವುದಾಗಿ ಖಚಿತಪಡಿಸಿದರು.

ಸಂಪುಟ ವಿಸ್ತರಣೆ ಕುರಿತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ , ಗೃಹ ಸಚಿವ ಅಮಿತ್ ಶಾ ಜೊತೆ ಮಾತನಾಡಿದ್ದ ಸಿಎಂ, ಒಪ್ಪಿಗೆ ಪಡೆದಿದ್ದರು. ನಾವು ನೀಡಿದ ಪಟ್ಟಿಯನ್ನು ಪಕ್ಷದ ವರಿಷ್ಠರು ಒಪ್ಪಿದ್ದಾರೆ. ಕೆಲವರನ್ನು ಮನವೊಲಿಸಿ ಹಾಗೂ ರಾಜ್ಯದ ಕೆಲ ನಾಯಕರೊಂದಿಗೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುತ್ತೇನೆ ಎಂದಿದ್ದರು.
ಇದೀಗ ಸೋಮವಾರವೇ ಸಂಪುಟ ವಿಸ್ತರಣೆ ಆಗುವುದರಿಂದ ಯಾರೆಲ್ಲ ಸಂಪುಟ ಸೇರುತ್ತಾರೆ ಅನ್ನೋ ಕುತೂಹಲ ಹೆಚ್ಚಿದೆ. ಜೊತೆ ಸದ್ಯವಿರುವ ಮೂರು ಡಿಸಿಎಂ ಸ್ಥಾನಗಳನ್ನು ಮುಂದುವರಿಸಲಾಗುವುದು. ಮತ್ತೆ ಹೊಸ ಡಿಸಿಎಂ ಹುದ್ದೆ ಸೃಷ್ಟಿಸಲ್ಲ ಎಂದು ಹೇಳಿದ್ದಾರೆ. ಇದರಿಂದ ಉಪಮುಖ್ಯಮಂತ್ರಿ ಕನಸು ಕಾಣುತ್ತಿದ್ದ ಸಚಿವ ಶ್ರೀರಾಮುಲು ಮತ್ತು ಶಾಸಕ ರಮೇಶ್ ಜಾರಕಿಹೊಳಿಗೆ ಹೇಗೆ ಸಮಾಧಾನ ಮಾಡ್ತಾರೆ ಎಂಬುದು ಕಾದು ನೋಡಬೇಕಿದೆ.



