ಡಿವಿಜಿ ಸುದ್ದಿ, ದಾವಣಗೆರೆ: ಮೈಕ್ ಸಿಕ್ಕರೆ ಸಾಕು, ಕಾಂಗ್ರೆಸ್ ಪಕ್ಷದ ಮೇಲೆ ಬೆಂಕಿಕಾರು ಈಶ್ವರಪ್ಪಗೆ ಇವತ್ತು ಜಿಲ್ಲಾ ಮಹಿಳಾ ಕಾಂಗ್ರೆಸ್ ಕಾರ್ಯಕರ್ತೆಯರು ತರಾಟೆಗೆ ತಗೆದುಕೊಂಡಿದ್ದರು.
ಇತ್ತೀಚೆಗೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್ . ಈಶ್ವರಪ್ಪ ಜಿಲ್ಲೆಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ಮಹಿಳೆಯ ತುರುಬಿಗೆ ಹೋಲಿಕೆ ಮಾಡಿದ್ದರು. ಇದನ್ನು ಖಂಡಿಸಿ ಇವತ್ತು ಕಾಂಗ್ರೆ ಪಕ್ಷದ ಮಹಿಳಾ ಘಟಕದ ವತಿಯಿಂದ ಪ್ರತಿಕಾಗೋಷ್ಠಿ ನಡೆಸಿ ಸಚಿವ ಕೆ.ಎಸ್. ಈಶ್ವರಪ್ಪ ಅವರನ್ನು ತರಾಟೆಗೆ ತಗೆದುಕೊಂಡರು. ಸಚಿವರು ಮಹಿಳೆ ತುರುಬಿನ ಬಗ್ಗೆ ಮಾತನಾಡುವ ಮೂಲಕ ಮಹಿಳೆ ಬಗ್ಗೆ ಅವಮಾನಕಾರಿಯಾಗಿ ಮಾತನಾಡಿದ್ದಾರೆ ಎಂದು ಜಿಲ್ಲಾ ಮಹಿಳಾ ಕಾಂಗ್ರೆಸ್ ಘಟಕದ ಜಿಲ್ಲಾಧ್ಯಕ್ಷೆ ಅನಿತಾ ಬಾಯಿ ಮಾಲತೇಶ್ ಆರೋಪಿಸಿದರು.
ಮಹಿಳೆಯರಿಗೆ ತುರುಬು ಬಿಚ್ಚುವುದು ಗೊತ್ತು, ಕಟ್ಟುವುದು ಗೊತ್ತಿದೆ. ಈಶ್ವರಪ್ಪ ಅವರನ್ನು ಮನೆಗೆ ಕಳುಹಿಸುವುದು ಗೊತ್ತಿದೆ. ಹೆಣ್ಣು ಮಕ್ಕಳ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡುವುದು ಸರಿಯಲ್ಲ, ಮಹಿಳೆಯರ ಬಗ್ಗೆ ಮಾತನಾಡಬೇಕಾದರೆ ಎಚ್ಚರಿಕೆಯಿಂದ ಮಾತನಾಡಬೇಕು. ಅವರು ಹೇಳಿರುವುದು ಇಡೀ ಹೆಣ್ಣು ಕುಲಕ್ಕೆ ಅಪಮಾನಗೊಳಿಸಿದ್ದಾರೆ. ಹೀಗಾಗಿ ಪ್ರತಿಯೊಬ್ಬ ಮಹಿಳೆಯೂ ಬಿಜೆಪಿಗೆ ಮತ ಹಾಕಬಾರದು ಎಂದು ಹೇಳಿದರು.
ಕಾಂಗ್ರೆಸ್ ಹಿರಿಯ ಮುಖಂಡ ಹಾಗೂ ಶಾಸಕ ಶಾಮನೂರು ಶಿವಶಂಕರಪ್ಪ ಹಾಗೂ ಮಾಜಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ಸಾಕಷ್ಟು ಅಭಿವೃದ್ದಿ ಕಾರ್ಯ ಮಾಡಿದೆ. ಉತ್ತಮ ಆಡಳಿತ ನೀಡಿದ ಕಾರಣ ದಾವಣಗೆರೆ ಮಹಾನಗರ ಪಾಲಿಕೆ ಪ್ರಥಮ ಹಂತದಲ್ಲಿ ಸ್ಮಾರ್ಟ್ ಸಿಟಿ ಯೋಜನೆಗೆ ಆಯ್ಕೆಯಾಗಿದೆ. ಈ ಬಾರಿಯ ಪಾಲಿಕೆ ಚುನಾವಣೆಯಲ್ಲಿ ಮಹಿಳೆಯರಿಗೆ ಹೆಚ್ಚಿನ ಮೀಸಲಾತಿ ಸಿಕ್ಕಿದ್ದು, 20 ಸ್ಥಾನ ಸಿಗಲಿದೆ . ಸಾಮಾಜಿಕ ನ್ಯಾಯ ಕಲ್ಪಿಸುವ ಕಾಂಗ್ರೆಸ್ ಪಕ್ಷ ಈ ಬಾರಿ ಮತ್ತೆ ಆಡಳಿತ ಚುಕ್ಕಾಣಿ ಹಿಡಿಯುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಹೇಳಿದರು.
ಈ ಸಂದರ್ಭದಲ್ಲಿ ಮಾಜಿ ಉಪಮೇಯರ್ ಮಂಜಮ್ಮ, ನಾಗರತ್ನಮ್ಮ, ಶುಭಮಂಗಳ, ಸುನಿತಾ ಭೀಮಣ್ಣ, ರಾಜೇಶ್ವರಿ, ಜಯಶ್ರೀ, ಸಂಗಮ್ಮ, ಸುಧಾಗೌಡ್ರು, ಸುಧಾ, ರಂಜಿತಾ, ಮಾಲತಿಬಾಯಿ, ದ್ರಾಕ್ಷಯಣಮ್ಮ, ದೀಪಾ ಸೇರಿದಂತೆ ಮತ್ತಿತರರಿದ್ದರು.



