ಡಿವಿಜಿ ಸುದ್ದಿ, ಬೆಂಗಳೂರು: ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರ ಭಾವನೆಗಳಿಗೆ ನಿರೀಕ್ಷಿತ ರೀತಿಯಲ್ಲಿ ಸ್ಪಂಧಿಸಲು ಸಾಧ್ಯವಾಗಿಲ್ಲ. ಆದರೆ, ಈಗ ಪಕ್ಷ ಸಂದಿಗ್ಧ ಸ್ಥಿತಿಯಲ್ಲಿದೆ ಇದ್ದು, ಕಾರ್ಯಕರ್ತರು ಪಕ್ಷವನ್ನು ಬಲಪಡಿಸಬೇಕು ಎಂದು ಜೆಡಿಎಸ್ ವರಿಷ್ಠ ಎಚ್ .ಡಿ ದೇವೇಗೌಡ ಪಕ್ಷದ ಕಾರ್ಯಕರ್ತರಿಗೆ ಪತ್ರ ಬರೆದು ನೋವು ತೋಡಿಕೊಂಡಿದ್ದಾರೆ.
ಚುನಾವಣೆ ಸೋಲುಗಳನ್ನು ಮೆಟ್ಟಿ ಗ್ರಾಮ ಮಟ್ಟದಿಂದ ಪಕ್ಷವನ್ನು ಬಲಪಡಿಸಬೇಕು ಎಂದು ಪತ್ರದಲ್ಲಿ ಹೇಳಿರುವ ದೇವೇಗೌಡರು, ಪಕ್ಷ ಸಂದಿಗ್ಧ ಸ್ಥಿತಿಯಲ್ಲಿದೆ. ಈ ಸ್ಥಿತಿಯಲ್ಲಿ ಕಾರ್ಯಕರ್ತರು ತಳಮಟ್ಟದಿಂದ ಪಕ್ಷ ಬಲಗೊಳಿಸಬೇಕಿದೆ ಎಂದು ಕರೆ ನೀಡಿದ್ದಾರೆ.
ಜೆಡಿಎಸ್ ಪಕ್ಷವನ್ನ ಮತ್ತೆ ಸಂಘಟಿಸಲು ಇದೇ ಗುರುವಾರ (ಜ.23) ರಂದು ಸಮಾವೇಶ ಹಮ್ಮಿಕೊಂಡಿದ್ದಾರೆ. ಪಕ್ಷದ ಚುನಾಯಿತ ಪ್ರತಿನಿಧಿಗಳು, ವಿವಿಧ ಚುನಾವಣೆಗಳಲ್ಲಿ ಸ್ಪರ್ಧಿಸಿದ್ದವರು, ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯರ್ತರನ್ನು ಪತ್ರ ಬರೆದು ಸಮಾವೇಶಕ್ಕೆ ಆಹ್ವಾನಿಸಿದ್ದಾರೆ.
ಪಕ್ಷದ ಮುಂದಿನ ಹೋರಾಟದ ರೂಪು ರೇಷೆ ಚರ್ಚಿಸಲು ಸಮಾವೇಶ ನಡೆಸುತ್ತಿರುವುದಾಗಿ ಅವರು ತಮ್ಮ ಪತ್ರದಲ್ಲಿ ಉಲ್ಲೇಖಿಸಿದ್ದಾರೆ . 23ರ ಬೆಳಗ್ಗೆ 11 ಗಂಟೆಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಸಮಾವೇಶ ನಡೆಯಲಿದೆ.



