ನವದೆಹಲಿ: ಕಾಂಗ್ರೆಸ್ ಯುವ ಮುಖಂಡ ಜ್ಯೋತಿರಾದಿತ್ಯ ಸಿಂಧಿಯಾ ಸೇರಿದಂತೆ ಅವರು 22 ಶಾಸಕರು ರಾಜೀನಾಮೆ ನೀಡಿದ ಬೆನ್ನಲ್ಲೇ ಮಧ್ಯಪ್ರದೇಶ ಸರ್ಕಾರ ಪತನದ ಹಂತಕ್ಕೆ ಬಂದು ನಿಂತಿದೆ. ಈ ಮೂಲಕ ಕಮಲನಾಥ್ ನೇತೃತ್ವದ ಮಧ್ಯಪ್ರದೇಶ ಸರ್ಕಾರ ಪತನದ ಅಂಚಿಗೆ ಬಂದಿದೆ.
ಒಟ್ಟು 230 ವಿಧಾಸಭಾ ಕ್ಷೇತ್ರವನ್ನು ಒಳಗೊಂಡಿರುವ ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷ 114 ಕ್ಷೇತ್ರ ಗೆದ್ದು ಅತಿ ದೊಡ್ಡ ಪಕ್ಷವಾಗಿತ್ತು. ಬಿಜೆಪಿ 109 ( 2 ಕ್ಷೇತ್ರ ತೆರವು ), ಪಕ್ಷೇತರರು 4, ಬಿಎಸ್ ಪಿ 2, ಎಸ್ ಪಿ 1 ಗೆದ್ದುಕೊಂಡಿವೆ. ಕಾಂಗ್ರೆಸ್ ಪಕ್ಷದ 22 ಶಾಸಕರು ರಾಜೀನಾಮೆ ನೀಡಿದ್ದರಿಂದ ಕಾಂಗ್ರೆಸ್ ಪಕ್ಷದ ಸರ್ಕಾರ ಅಲ್ಪ ಮತಕ್ಕೆ ಕುಸಿದಿದೆ.
ಸಿಂಧಿಯಾ ರಾಜೀನಾಮೆಗೂ ಮುನ್ನ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾದರು. ಬಳಿಕ ಕಾಂಗ್ರೆಸ್ಗೆ ರಾಜೀನಾಮೆ ನೀಡಿದ್ದಾರೆ. ಅವರು ಒಂದೆರಡು ದಿನದಲ್ಲಿ ಬಿಜೆಪಿ ಸೇರುವ ಸಾಧ್ಯತೆ ಇದೆ.
ಬಿಜೆಪಿ ಮುಖಂಡರ ನಿಯೋಗವು ಮಧ್ಯ ಪ್ರದೇಶ ಸ್ಪೀಕರ್ ಎನ್.ಪಿ. ಪ್ರಜಾಪತಿ ಅವರನ್ನು ಭೇಟಿಯಾಗಿ ಕಾಂಗ್ರೆಸ್ ಶಾಸಕರ ರಾಜೀನಾಮೆ ಕುರಿತು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ಸ್ಪೀಕರ್ ಕೂಡ ನಿಯಮಾನುಸಾರ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ.ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ ಎಲ್ಲ ಶಾಸಕರು ಬೆಂಗಳೂರಿನ ರೆಸಾರ್ಟ್ನಲ್ಲಿ ತಂಗಿದ್ದಾರೆ.
ಸಿಂಧಿಯಾ ಕಾಂಗ್ರೆಸ್ ಬಿಟ್ಟ ಬಳಿಕ, 22 ಶಾಸಕರು ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ನೀಡಿರುವ ಶಾಸಕರ ಹೆಸರನ್ನು ಭೂಪೇಂದ್ರ ಸಿಂಗ್ ಅವರು ಪ್ರಕಟಿಸಿದ್ದಾರೆ. ಕಾಂಗ್ರೆಸ್ನ ಇನ್ನೂ ಕೆಲ ಶಾಸಕರು ರಾಜೀನಾಮೆ ನೀಡಲಿದ್ದಾರೆ. ಈ ಸಂಖ್ಯೆ 30ರವರೆಗೆ ಹೋಗಬಹುದು ಎಂದು ತಿಳಿಸಿದ್ದಾರೆ. ಸಿಂಧಿಯಾ ಅವರಿಗೆ ಮಧ್ಯ ಪ್ರದೇಶದಿಂದ ಅವರನ್ನು ರಾಜ್ಯಸಭೆಗೆ ಆಯ್ಕೆ ಮಾಡಿ ಕೇಂದ್ರದಲ್ಲಿ ಸಚಿವ ಸ್ಥಾನ ನೀಡುವ ಸಾಧ್ಯತೆ ಇದೆ.



