ಡಿವಿಜಿ ಸುದ್ದಿ, ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ಸಂವಿಧಾನ ವಿರೋಧಿ. ಅಕ್ರಮ ವಲಸಿಗರನ್ನು ಸಕ್ರಮ ಗೊಳಿಸಲು ನಮ್ಮ ವಿರೋಧ ಇಲ್ಲ. ಆದರೆ, ಮುಸ್ಲಿಮರನ್ನು ಹೊರಗಿಟ್ಟಿರುವುದು ಯಾಕೆ? ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ ಮಾಡಿದರು.
ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಡೆದ ಸಿಎಎ ಮತ್ತು ಎನ್ಆರ್ ಸಿ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ಪೌರತ್ವ ಕಾಯ್ದೆ, ಎನ್ ಪಿಆರ್, ಎನ್ಆರ್ ಸಿ ಎಲ್ಲವೂ ಒಂದೇ. ಮೋದಿ ಈ ಬಗ್ಗೆ ಜನರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದರು.
ಮುಸ್ಲಿಮರೂ ನಮ್ಮ ದೇಶಕ್ಕೆ ಬಂದಿದ್ದಾರೆ. ಬಾಂಗ್ಲಾ, ಪಾಕಿಸ್ತಾನ, ಅಫ್ಘಾನಿಸ್ಥಾನ ಬಿಟ್ಟು ಇತರ ನೆರೆ ರಾಜ್ಯಗಳಿಂದಲೂ ಹಲವರು ವಲಸೆ ಬಂದಿದ್ದಾರೆ. ಅವರನ್ನು ಏಕೆ ಕಾಯ್ದೆಯಿಂದ ಹೊರಗಿಡಲಾಗಿದೆ ಎಂದರು.
ಹಿಂದೂ ರಾಷ್ಟ್ರ ಆಗಲು ನಾವು ಬಿಡಲ್ಲ
ಭಾರತ ಒಂದು ಜಾತ್ಯಾತೀತ, ವೈವಿಧ್ಯತೆಯಲ್ಲಿ ಏಕತೆ ಹೊಂದಿರುವ ರಾಷ್ಟ್ರ. ಅದನ್ನು ಹಿಂದೂ ರಾಷ್ಟ್ರ ಮಾಡಲು ನಾವು ಬಿಡುವುದಿಲ್ಲ. ನಿಮ್ಮ ಉದ್ದೇಶ ದೇಶವನ್ನು ಹಿಂದೂ ರಾಷ್ಟ್ರ ಮಾಡಬೇಕು ಎಂಬುದು ಅಷ್ಟೇ. ಇದು ಬಿಜೆಪಿಯ ಹಿಡನ್ ಅಜೆಂಡಾ ಆಗಿದೆ. ಜಾತ್ಯಾತೀತತೆ ಸಂವಿಧಾನದ ಮೂಲ ಆಶಯವಾಗಿದ್ದು ಅದನ್ನು ಉಲ್ಲಂಘಿಸಲಾಗುತ್ತಿದೆ ಎಂದರು.
ಬಹುಮತ ಇರುವ ಪಕ್ಷ ಕಾನೂನು ಮಾಡಲಿ, ಆದರೆ ಅದು ನ್ಯಾಯಬದ್ಧ ಇಲ್ಲವಾದರೆ ಅದನ್ನು ವಿರೋಧಿಸಿ ಎಂದು ಗಾಂಧೀಜಿ ಹೇಳಿದ್ದರು. ಈ ಕಾಯ್ದೆ ನಮಗೆ ಬೇಕಾಗಿದೆಯಾ? ದೇಶದಲ್ಲಿ ಸಾಕಷ್ಟು ಸಮಸ್ಯೆಗಳಿದ್ದು ಈ ಬಗ್ಗೆ ನೀವು ಮಾತನಾಡುತ್ತಿಲ್ಲ ಎಂದು ಕೇಂದ್ರ ಸರ್ಕಾರವನ್ನು ತರಾಟೆ ತಗೆದುಕೊಂಡರು.
ಕೇಂದ್ರ ಸರ್ಕಾರ ತಂದಿರುವ ಕಾನೂನು ಸಂವಿಧಾನ ವಿರೋಧಿ ಮಾತ್ರವಲ್ಲ, ಮಾನವೀಯತೆಯ ವಿರೋಧಿ ಆಗಿದೆ. ಈ ಕಾಯ್ದೆಯಿಂದ ಎಲ್ಲರಿಗೂ ಅನ್ಯಾಯವಾಗುತ್ತದೆ. ದಲಿತರಿಗೆ, ಆದಿವಾಸಿಗಳಿಗೆ ಎಲ್ಲರಿಗೂ ಅನ್ಯಾಯ ಆಗುತ್ತದೆ ಎಂದರು.
ಪ್ರಣಾಳಿಕೆಯಲ್ಲಿ ಹೇಳಿದ್ದೇವೆ ಎಂದು ಕಾಯ್ದೆ ಜಾರಿ ತಂದರೆ..? ಬೇರೆ ವಿಚಾರ ಬಗ್ಗೆಯೂ ಪ್ರಣಾಳಿಕೆಯಲ್ಲಿ ಹೇಳಿದ್ದೀರಿ. ಅದನ್ನು ಏಕೆ ಜಾರಿ ಮಾಡುತ್ತಿಲ್ಲ? ಬಹುಮತ ಇದ್ದರೂ ಜನ ವಿರೋಧಿ ಕಾನೂನು ತರಬಾರದು. ಇದನ್ನು ನಾವು ವಿರೋಧ ಮಾಡಲೇ ಬೇಕು ಎಂದರು.



