ಡಿವಿಜಿ ಸುದ್ದಿ, ಬೆಂಗಳೂರು: ರಾಜ್ಯದಲ್ಲಿ ಭಾರೀ ಮಳೆಗೆ ಜನ ಜೀವನ ತತ್ತರಿಸಿ ಹೋಗಿದ್ದು, ಇದೀಗ ಇನ್ನೂ ಮೂರು ದಿನ ಭಾರೀ ಮಳೆಯಾಗಲಿದೆ ಎಂಬ ಆಘಾತಕಾರಿ ಮಾಹಿತಿಯನ್ನು ಹವಾಮಾನ ಇಲಾಖೆ ನೀಡಿದೆ.
ಕರಾವಳಿ ಜಿಲ್ಲೆಗಳಲ್ಲಿ ಇಂದಿನಿಂದ ಆಗಸ್ಟ್ 13 ರವರೆಗೆ ಭಾರೀ ಮಳೆಯಾಗಲಿದೆ. ಉತ್ತರ ಒಳನಾಡಿನಲ್ಲಿ ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ದಕ್ಷಿಣ ಒಳನಾಡಿನಲ್ಲೂ ಆಗಸ್ಟ್ 9 ರಿಂದ 13ರವರೆಗೆ ವರುಣ ಅಬ್ಬರಿಸಲಿದ್ದಾನೆ. ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಹೆಚ್ಚು ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್.ಪಾಟೀಲ್ ಮಾಹಿತಿ ನೀಡಿದ್ದಾರೆ.
ಈಗಾಗಲೇ ಇಂದು ರೆಡ್ ಅಲರ್ಟ್ ಘೋಷಿಸಲಾಗಿದ್ದು, ಆಗಸ್ಟ್ 10 ರಂದು ಮಲೆನಾಡು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಸಹ ಆಗಸ್ಟ್ 9 ಹಾಗೂ 10 ರಂದು 2 ದಿನ ಭಾರೀ ಮಳೆಯಾಗಲಿದೆ ಎಂದು ಎಚ್ಚರಿಕೆ ನೀಡಲಾಗಿದೆ



