ಡಿವಿಜಿ ಸುದ್ದಿ, ಬೆಂಗಳೂರು: ರಾಜ್ಯದ ಕರಾವಳಿ ಭಾಗದಲ್ಲಿ ಜು.7ರಿಂದ 11ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದ್ದು, ಐದೂ ದಿನ ಮುನ್ನೆಚ್ಚರಿಕೆ ನೀಡಲಾಗಿದೆ. ಆಗ್ನೇಯ ಅರಬ್ಬಿ ಸಮುದ್ರದಿಂದ ರಾಜ್ಯದ ಕರಾವಳಿಯೆಡೆಗೆ ಗಂಟೆಗೆ 40ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.
ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಜು.10ರಿಂದ ಮಳೆ ಪ್ರಮಾಣ ಹೆಚ್ಚಾಗುವ ಸಾಧ್ಯತೆಯಿದೆ. ಮುಂದಿನ 48 ಗಂಟೆಗಳವರೆಗೆ ಕೆಲವೆಡೆ ಸಾಧಾರಣ ಮಳೆಯಾಗಬಹುದು ಎಂದು ತಿಳಿಸಿದೆ ಮಾಹಿತಿ ನೀಡಿದೆ.
ಸೋಮವಾರ ಉಡುಪಿ ಜಿಲ್ಲೆಯ ಕೊಲ್ಲೂರಿನಲ್ಲಿ ಸೋಮವಾರ 10 ಸೆಂ.ಮೀ ಗರಿಷ್ಠ ಮಳೆಯಾಗಿದೆ. ಕೊಟ್ಟಿಗೆಹಾರ 8, ಭಾಗಮಂಡಲ 6, ಕಳಸ 5, ಸುಬ್ರಹ್ಮಣ್ಯ, ಸಿದ್ದಾಪುರ, ಕದ್ರಾ, ಸಾಗರ, ಶೃಂಗೇರಿ, ಸಕಲೇಶಪುರ 4, ಧರ್ಮಸ್ಥಳ, ಉಪ್ಪಿನಂಗಡಿ, ಅಂಕೋಲಾ, ಹೊಸನಗರ, ಮೂಡಿಗೆರೆ, ಕೊಪ್ಪ 3, ಬೆಳ್ತಂಗಡಿ, ಪುತ್ತೂರು, ಸುಳ್ಯ, ಕಾರ್ಕಳ, ಬೆಳಗಾವಿ, ಮಡಿಕೇರಿ 2, ಮೂಡುಬಿದ್ರೆ, ಕುಂದಾಪುರ, ಕಾರವಾರ, ಭಟ್ಕಳ, ಗೋಕರ್ಣ, ಬೇಲೂರು, ಎಚ್.ಡಿ.ಕೋಟೆ, ಶ್ರೀರಂಗಪಟ್ಟಣದಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ.



