ಡಿವಿಜಿ ಸುದ್ದಿ, ಶಿವಮೊಗ್ಗ: ಜಿಲ್ಲೆಯಲ್ಲಿ ಅಪರಾಧ ಪ್ರಕರಣಗಳು ಹೆಚ್ಚಾಗುತತ್ತಿದ್ದು, ಪೊಲೀಸರನ್ನು ಕಂಡರೆ ಕಳ್ಳರಿಗೆ ಭಯವೇ ಇಲ್ಲದಂತಾಗಿದೆ. ಅಪರಾಧ ತಡೆಗಟ್ಟುವಲ್ಲಿ ಪೊಲೀಸರ ವೈಫಲ್ಯ ಎದ್ದು ಕಾಣುತ್ತಿದೆ ಎಂದು ಸಚಿವ ಕೆ.ಎಸ್. ಈಶ್ವರಪ್ಪ ಪೊಲೀಸರ ವಿರುದ್ಧ ಮತ್ತೆ ಕಿಡಿಕಾರಿದರು.
ಶಿವಮೊಗ್ಗ ನಗರದ ಕುವೆಂಪುನಗರ ಬಡಾವಣೆಗೆ ಭೇಟಿ ನೀಡಿ ಸಾರ್ವಜನಿಕರ ಅಹವಾಲು ಸ್ವೀಕರಿಸಿ ನಂತರ ಮಾತನಾಡಿದ ಅವರು ಆನಂದರಾಯರು ಶಿವಮೊಗ್ಗ ಕ್ಷೇತ್ರದ ಶಾಸಕರಾಗಿದ್ದ ಅಪರಾಧ ಪ್ರಕರಣಗಳು ಹೆಚ್ಚಾಗಿದ್ದವು. ನಂತರದ ದಿನಗಳಲ್ಲಿ ಅಪರಾಧ ಪ್ರಕರಣಗಳ ಕಡಿಮೆ ಆಗಿದ್ದವು. ಆದರೆ ಇದೀಗ ಮತ್ತೆ ಅಪರಾಧಗಳ ಸಂಖ್ಯೆ ಹೆಚ್ಚಾಗುತ್ತಿದೆ ಎಂದರು.
ನಗರದಲ್ಲಿ ರೌಡಿಗಳು ಮಚ್ಚು, ಲಾಂಗ್ ಹಿಡಿದುಕೊಂಡು ಓಡಾಡುತ್ತಿದ್ದಾರೆ. ಕೊಲೆ, ಸುಲಿಗೆ ಪ್ರಕರಣಗಳು ಹೆಚ್ಚಾಗುತ್ತಿವೆ. ಗಾಂಜಾ, ಹುಕ್ಕಾ ಸೇವನೆ ಹೆಚ್ಚಾಗಿರುವ ಜೊತೆಗೆ ಮನೆಯ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಕಿಡಿಗೇಡಿಗಳು ಬೆಂಕಿ ಹಚ್ಚುತ್ತಿದ್ದಾರೆ. ಹೀಗಿದ್ದರೂ ಪೊಲೀಸರು ಅಪರಾಧ ತಡೆಗಟ್ಟಲು, ಯಾವುದೇ ಕ್ರಮ ಕೈಗೊಳ್ಳಲು ಮುಂದಾಗಿಲ್ಲ. ಪೊಲೀಸರು ಕೆಲಸ ಮಾಡ್ತೀರಾ…? ಅಥವಾ ಮಲಗಿದ್ದೀರಾ ಎಂದು ಗೊತ್ತಾಗುತ್ತಿಲ್ಲ ಎಂದರು.
ಪೊಲೀಸ್ ಇಲಾಖೆ ಬಗ್ಗೆ ಪ್ರತ್ಯೇಕ ಸಭೆ ನಡೆಸುತ್ತೇನೆ. ನಿಮ್ಮಿಂದ ಹೇಗೆ ಕೆಲಸ ಮಾಡಿಸಬೇಕು ಎಂಬುದು ನನಗೆ ಗೊತ್ತಿದೆ ಎಂದು ಸಚಿವ ಈಶ್ವರಪ್ಪ ಎಚ್ಚರಿಕೆ ನೀಡಿದ್ದಾರೆ.



