ಡಿವಿಜಿ ಸುದ್ದಿ, ಮೈಸೂರು: ಎಸ್ಎಸ್ಎಲ್ಸಿ ಪರೀಕ್ಷೆ ಬೇಡ ಎನ್ನುವುದು ಸರಿಯಲ್ಲ. ಎಲ್ಲಾ ಮುಂಜಾಗ್ರತಾ ಕ್ರಮ ಕೈಗೊಂಡು ಪರೀಕ್ಷೆ ನಡೆಸಲೇ ಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿದ್ಯಾರ್ಥಿಗಳ ಭವಿಷ್ಯ ದೃಷ್ಟಿಯಿಂದ 10ನೇ ತರಗತಿ ಪರೀಕ್ಷೆ ಬೇಡ ಎನ್ನುವುದು ಸರಿಯಲ್ಲ. ಇದು ವಿದ್ಯಾರ್ಥಿಗಳ ಮಹತ್ವದ ಘಟ್ಟವಾಗಿದೆ. ಪರೀಕ್ಷೆ ಅನಡೆಸುವುದು ಅಗತ್ಯವಾಗಿದೆ ಎಂದರು.
ಖಾಸಗಿ ಶುಲ್ಕ ವಿಚಾರವಾಗಿ ಮಾತನಾಡಿ, ಸರ್ಕಾರ ಎಲ್ಲವನ್ನೂ ಪರಿಶೀಲನೆ ನಡೆಸಿ ತೀರ್ಮಾನ ಕೈಗೊಳ್ಳಲಿ. ಖಾಸಗಿ ಶಾಲೆಗಳಲ್ಲೂ ಬಡ ಮಕ್ಕಳು ಓದುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು ಶುಲ್ಕ ನಿಗದಿ ಮಾಡಿ ಎಂದು ಸಲಹೆ ನೀಡಿದರು.
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪದಗ್ರಹಣಕ್ಕೆ ಅನುಮತಿ ಕೊಡದೆ ರಾಜ್ಯ ಸರ್ಕಾರ ಕೀಳುಮಟ್ಟದ ರಾಜಕಾರಣ ಮಾಡುತ್ತಿದೆ. ಯಡಿಯೂರಪ್ಪ ಅವರಿಂದ ಈ ರೀತಿಯ ಕೀಳುಮಟ್ಟದ ರಾಜಕಾರಣ ನಿರೀಕ್ಷೆ ಮಾಡಿರಲಿಲ್ಲ. ದೆಹಲಿಯಲ್ಲಿ ಅಮಿತ್ ಶಾಗೆ ಒಂದು ರೂಲ್ಸ್. ನಮಗೆ ಒಂದು ನಿಯಮನಾ? ನಾವು ಸಾಮಾಜಿಕ ಅಂತರ ಕಾಯ್ದುಕೊಂಡೇ ಕಾರ್ಯಕ್ರಮ ನಡೆಸುತ್ತಿದ್ದೆವು ಎಂದು ಕಿಡಿಕಾರಿದರು.
ಮೊದಲ ಮೌಖಿಕವಾಗಿ ಕೇಳಿದಾಗ ಸರ್ಕಾರ ಒಪ್ಪಿತ್ತು. ಪತ್ರದ ಮೂಲಕ ಅನುಮತಿ ಕೇಳಿದಾಗ ಅನುಮತಿ ನಿರಾಕರಿಸಲಾಗಿದೆ. ಇದನ್ನು ನಾವು ರಾಜಕೀಯವಾಗಿಯೇ ಹೆದರಿಸುತ್ತೇವೆ. ಇನ್ನೊಮ್ಮೆ ಪತ್ರ ಕೊಡುವುದಾಗಲಿ, ಮನವಿ ಮಾಡುವುದಾಗಲಿ ಪ್ರಶ್ನೆಯೇ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ನಂತರ ದೇವೇಗೌಡರು ರಾಜ್ಯಸಭೆಗೆ ಆಯ್ಕೆ ವಿಚಾರ ನನಗೇನು ಗೊತ್ತಿಲ್ಲ. ಕಾಂಗ್ರೆಸ್ನಿಂದ ಒಂದು ಅಭ್ಯರ್ಥಿ ಹಾಕಲು ನಿರ್ಧಾರ ಮಾಡಲಾಗಿತ್ತು. ಅದಕ್ಕೆ ಮಲ್ಲಿಕಾರ್ಜುನ ಖರ್ಗೆ ನಾಮಪತ್ರ ಸಲ್ಲಿಸಿದ್ದಾರೆ. ದೇವೇಗೌಡರ ವಿಚಾರ ನನಗೆ ಗೊತ್ತಿಲ್ಲ ಎಂದರು.



