ಡಿವಿಜಿ ಸುದ್ದಿ, ಮಂಡ್ಯ: ಸಂಸದೆ ಎ.ಸುಮಲತಾ ಅವರಿಗೆ ಕೊರೊನಾ ಪಾಸಿಟಿವ್ ಪತ್ತೆಯಾದ ಹಿನ್ನೆಲೆ ಅವರು ಜಿಲ್ಲೆಯ ಕಳೆದ ಒಂದು ವಾರದಲ್ಲಿ ವಿವಿಧ ಸ್ಥಳಗಳಿಗೆ ಭೇಟಿ ಕೊಟ್ಟಿದ್ದರು. ಇದೀಗ ಭೇಟಿ ಕೊಟ್ಟ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.
ಜೂನ್ 30ರಂದು ಸುಮಲತಾ ಅವರು ನಾಗಮಂಗಲ ತಾಲ್ಲೂಕು ಬ್ರಹ್ಮದೇವರಹಳ್ಳಿ ಭೇಟಿ ಕೊಟ್ಟಿದ್ದರು. ಅಲ್ಲಿ ವಿವಿಧ ಕಾಮಗಾರಿಗೆ ಚಾಲನೆ ನೀಡಿದ್ದರು. ಅವರೊಂದಿಗೆ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಪಾಲ್ಗೊಂಡಿದ್ದರು. ಜೊತೆಗೆ ಮಂಡ್ಯ ರೈತ ಸಭಾಂಗಣದಲ್ಲಿ ಕೊರೊನಾ ವಾರಿಯರ್ಸ್ಗಳಿಗೆ ಅಭಿನಂದಿಸಿದ್ದರು. ಪಾಂಡವಪುರ ಸರ್ಕಾರಿ ಶಾಲೆಯ ಕಾಂಪೌಂಡ್ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದ್ದರು.
ಜುಲೈ 1ರಂದು ಬೆಸಗರಹಳ್ಳಿ ಗ್ರಾಮಕ್ಕೆ ಭೇಟಿ ನೀಡಿ ಬಸ್ ನಿಲ್ದಾಣ ಕಾಮಗಾರಿ ವೀಕ್ಷಣೆ ಮಾಡಿದ್ದರು. ಸಮುದಾಯ ಭವನದ ಬಳಿ ಸಸಿ ನೆಟ್ಟು ಗ್ರಾಮಸ್ಥರಿಗೂ ಸಸಿ ವಿತರಣೆ ಮಾಡಿದ್ದರು. ಈಗ ಈ ಸ್ಥಳಗಳಲ್ಲಿ ಆತಂಕ ಮನೆ ಮಾಡಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ,ಸಂಸದರು ಓಡಾಡಿರುವ ಜಾಗದ ಮಾಹಿತಿ ಪಡೆಯಲಾಗಿದೆ. ಅವರ ಸಂಪರ್ಕಕ್ಕೆ ಬಂದಿರುವವರನ್ನು ಕ್ವಾರಂಟೈನ್ ಮಾಡಲಾಗುವುದು ಎಂದಿದ್ದಾರೆ.



