ಡಿವಿಜಿಸುದ್ದಿ.ಕಾಂ, ದಾವಣಗೆರೆ: 32 ವರ್ಷಗಳ ನಂತರ ಜಿಲ್ಲೆಯಲ್ಲಿ ಸೆ. 29 ರಿಂದ ಅಕ್ಟೋಬರ್ 8 ರವರೆಗೆ ರಂಭಾಪುರಿ ಶ್ರೀಗಳ ದಸರಾ ಧರ್ಮ ಸಮ್ಮೇಳನ ನಡೆದಿದ್ದು, ಸರ್ವಧರ್ಮೀಯರೆಲ್ಲರೂ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ವೀರಶೈವ ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಕರೆ ನೀಡಿದರು.
ನಗರದ ಹೈಸ್ಕೂಲ್ ಮೈದಾನದಲ್ಲಿ ನಡೆಯುವ ಧರ್ಮ ಸಮ್ಮೇಳನ ವೇದಿಕೆ ನಿರ್ಮಾಣಕ್ಕೆಂದು ಹಂದರಗಂಬ ಪೂಜೆ ನೆರವೇರಿಸಿ ಮಾತನಾಡಿದರು.

ರಂಭಾಪುರಿ ಶ್ರೀಗಳ ಪೀಠಾರೋಹಣದ ನಂತರ 28ನೇ ಶರನ್ನವರಾತ್ರಿ ದಸರಾ ಧರ್ಮ ಸಮ್ಮೇಳನ ಕಾರ್ಯಕ್ರಮ ಇದಾಗಿದ್ದು, ರಂಭಾಪುರಿ ಶ್ರೀಗಳು ದಸರಾ ಕಾರ್ಯಕ್ರಮದ ದಿವ್ಯ ಸಾನ್ನಿಧ್ಯ ವಹಿಸಲಿದ್ದಾರೆ ಎಂದರು.
ಈ ಸಮಾರಂಭಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ನಾಡಿನ ಸ್ವಾಮೀಜಿಗಳು, ಸಾಹಿತಿಗಳು, ವಿದ್ವಾಂಸರು, ಸಮಾಜ ಚಿಂತಕರು, ಕಲಾವಿದರು, ರಾಜಕೀಯ ಮುಖಂಡರು ಪಾಲ್ಗೊಳ್ಳಲಿದ್ದಾರೆ.
ಈ ಸಂದರ್ಭದಲ್ಲಿ ಕೊಟ್ಟೂರು ಮಠದ ಬಸವೇಶ್ವರ ಶಿವಾಚಾರ್ಯ ಸ್ವಾಮೀಜಿ, ಆವರಗೊಳ್ಳ ಮಠದ ಓಂಕಾಶಿವಾಚಾರ್ಯ ಸ್ವಾಮೀಜಿ, ಯಡಿಯೂರಿನ ರೇಣುಕಾಶಿವಾಚಾರ್ಯ ಸ್ವಾಮೀಜಿ, ತಾವರಕೆರೆಯ ಅಭಿನವಸಿದ್ಧಲಿಂಗ ಶಿವಾಚಾರ್ಯ ಸ್ವಾಮೀಜಿ, ಚನ್ನಗಿರಿಯ ಕೇದಾರ ಶಿವಶಾಂತವೀರ ಸ್ವಾಮೀಜಿ, ಅಖಿಲ ಭಾರತ ವೀರಶೈವ ಮಹಾಸಭಾದ ಉಪಾಧ್ಯಕ್ಷ ಅಥಣಿ ವೀರಣ್ಣ ಉಪಸ್ಥಿತರಿದ್ದರು.



